ಸಿ ಎಂ ಉದಾಸಿ ನಿಧನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂತಾಪ

Share

ಬೆಂಗಳೂರು: ಮಾಜಿ ಸಚಿವ, ಹಾನಗಲ್ ಕ್ಷೇತ್ರದ ಶಾಸಕರಾಗಿದ್ದ ರಾಜ್ಯ ಬಿಜೆಪಿಯ ಹಿರಿಯ ಮುಖಂಡ ಸಿ ಎಂ ಉದಾಸಿ ಅವರ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ‌ ಬಸವರಾಜ್ ಬೊಮ್ಮಾಯಿ ದಿಗ್ಭ್ರಾಂತಿ ವ್ಯಕ್ತಪಡಿಸಿದ್ದಾರೆ.

ಸಿಎಂ ಉದಾಸಿ ಅವರು ರಾಜ್ಯ ರಾಜಕಾರಣದ ಹಿರಿಯ ನಾಯಕರು. ಅವರಿಗೆ ಆಡಳಿತದಲ್ಲಿ ಅಪಾರ ಅನುಭವ ಇತ್ತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಹತ್ತಿರದವರಾಗಿದ್ದರು‌. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಲೋಕೋಪಯೋಗಿ ಖಾತೆಗಳನ್ನು ಉದಾಸಿ ಅವರು ಅಚ್ಚುಕಟ್ಟಾಗಿ ನಿಭಾಯಿಸಿದ್ದರು. ಉದಾಸಿ ಅವರು ಏಳು ಭಾಷೆಗಳನ್ನು ಬಲ್ಲ ಧೀಮಂತ ನಾಯಕ. ಅಂಥ ಮುತ್ಸದ್ದಿ ನಾಯಕನನ್ನು ಕಳೆದುಕೊಂಡು ರಾಜ್ಯ ಈಗ ಬಡವಾಗಿದೆ. ಇದರಿಂದ ಕರ್ನಾಟಕ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಎಂದು ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ವೈಯಕ್ತಿಕವಾಗಿ ಸಿಎಂ ಉದಾಸಿ ಅವರು ನನಗೆ ಗುರುಗಳು ಹಾಗೂ ಮಾರ್ಗದರ್ಶಕರು. ಅಂಥವರನ್ನು ಕಳೆದುಕೊಂಡಿರುವುದಕ್ಕೆ ನನಗೆ ಬಹಳ ದುಃಖವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.