ಹಾವೇರಿ ಜಿಲ್ಲೆಗೆ 6 ಸಾವಿರ ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೇಂದ್ರ ಸಚಿವರಿಗೆ ಸಚಿವ ಬೊಮ್ಮಾಯಿ ಮನವಿ

Share

ಹಾವೇರಿ: ಪ್ರಸಕ್ತ ಮುಂಗಾರು ಹಂಗಾಮಿಗೆ ಜಿಲ್ಲೆಗೆ ಅಗತ್ಯವಾಗಿರುವ 6,000 ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಅವರಿಗೆ ಮನವಿ ಮಾಡಿದ್ದಾರೆ.

ಹಾವೇರಿ ಕೃಷಿ ಪ್ರಧಾನ ಜಿಲ್ಲೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮುಂಗಾರು ಹಂಗಾಮಿನಲ್ಲಿ ಹಾವೇರಿಗೆ ಈ ಬಾರಿ ಕೇವಲ 2,635 ಮೆಟ್ರಿಕ್ ಟನ್ ಡಿಎಪಿ ಗೊಬ್ಬರ ಹಂಚಿಕೆ ಆಗಿರುತ್ತದೆ. ಬಿತ್ತನೆ ಸಮಯದಲ್ಲಿ ಡಿಎಪಿ ರಸಗೊಬ್ಬರದ ಅವಶ್ಯಕತೆ ಹೆಚ್ಚಾಗಿರುತ್ತದೆ. ಹೀಗಾಗಿ ಜಿಲ್ಲೆಗೆ 40 ಸಾವಿರ ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ನ್ಯಾಷನಲ್ ಫರ್ಟಿಲೈಜರ್ ಸಂಸ್ಥೆಯು ಹೊರದೇಶದಿಂದ ಗುಜರಾತಿನ ಬಿಫಾವ ಬಂದರು ಮೂಲಕ 40,000 ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರವನ್ನು ಆಮದು ಮಾಡಿಕೊಂಡಿದೆ. ಇದರಲ್ಲಿ ಹಾವೇರಿ ಜಿಲ್ಲೆಗೆ 6000 ಮೆಟ್ರಿಕ್ ಟನ್ ಗೊಬ್ಬರ ಹಂಚಿಕೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ.