ಅ.27ರಂದು ಜಿಲ್ಲಾ ವಾಲ್ಮೀಕಿ ನಾಯಕ ನೌಕರರ ಸಂಘದ ಉದ್ಘಾಟನೆ, ಪ್ರತಿಭಾ ಪುರಸ್ಕಾರ
ಹಾವೇರಿ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಜಿಲ್ಲಾ ವಾಲ್ಮೀಕಿ ನಾಯಕ ನೌಕರರ ಸಂಘದ ಉದ್ಘಾಟನೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಅ.27 ಭಾನುವಾರ ಬೆಳಿಗ್ಗೆ 10-30ಕ್ಕೆ ಇಲ್ಲಿನ ಶಿವಶಕ್ತಿ ಪ್ಯಾಲೇಸ್ನಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ8-30 ರಿಂದ 10ರವರೆಗೆ ಮೆರವಣಿಗೆ ಹಾಗೂ ಬೈಕ್ ರ್ಯಾಲಿ ಕೆಇಬಿ ಸಮುದಾಯ ಭವನದಿಂದ ಶಿವಶಕ್ತಿ ಪ್ಯಾಲೇಸ್ ವರೆಗೆ ಜರುಗಲಿದೆ. ಬೈಕ್ರ್ಯಾಲಿ ಹಾಗೂ ಮೆರವಣಿಗೆಯನ್ನು ಶಾಸಕ ನೆಹರು ಓಲೇಕಾರ ಉದ್ಘಾಟಿಸುವರು. ನಂತರ ನಡೆಯುವ ಸಭಾ ಕಾರ್ಯಕ್ರಮದ ಸಾನಿಧ್ಯವನ್ನು ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀ ವಹಿಸುವರು, ಜಿಲ್ಲಾ ವಾಲ್ಮೀಕಿ ನಾಯಕ ನೌಕರರ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ನೆರವೇರಿಸುವರು, ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮಾಲಾರ್ಪಣೆ ಗೃಹ ಹಾಗೂ ಸಹಕಾರಿ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ನೆರವೇರಿಸುವರು, ದಿ.ಎಲ್.ಜಿ.ಹಾವನೂರು ಭಾವಚಿತ್ರಕ್ಕೆ ಶಾಸಕರು ಹಾಗೂ ಮಾಜಿ ಸಚಿವರಾದ ಸತೀಶ ಜಾರಕಿಹೊಳಿ ಮಾಲಾರ್ಪಣೆ ಮಾಡುವರು, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು.
ಸಾಧಕರಿಗೆ ಸನ್ಮಾನ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಚುನಾಯಿತ ಪ್ರತಿನಿಧಿಗಳಿಗೆ ಸರಕಾರದ ಮಾಜಿ ಮುಖ್ಯ ಸಚೇತಕ ಡಿ.ಎಮ್.ಸಾಲಿ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷರಾದ ಜಿ.ಟಿ.ಚಂದ್ರಶೇಖರಪ್ಪ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ಶಿವಕುಮಾರ ಉದಾಸಿ, ನಿವೃತ್ತ ಜಿಲ್ಲಾಧಿಕಾರಿ ಬಿ.ಶಿವಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರ, ಕವಿವಿಯ ಕುಲಸಚಿವ ಎನ್.ಎಂ.ಸಾಲಿ, ಐಎಎಸ್ ಅಧಿಕಾರಿ ಪವನಕುಮಾರ ಗಿರಿಯಪ್ಪನವರ ಹಾಗೂ ಜಿಲ್ಲೆಯ ವಾಲ್ಮೀಕಿ ಸಮಾಜದ ಚುನಾಯಿತ ಪ್ರತಿನಿಧಿಗಳು ಹಾಗೂ ಪ್ರಮುಖರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾಹಿತಿಗಳು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸುವರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾ ವಾಲ್ಮೀಕಿ ನಾಯಕ ನೌಕರರ ಸಂಘದ ಅಧ್ಯಕ್ಷ ಪ್ರಮೋದ ನಲವಾಗಲ, ಗೌರವಾಧ್ಯಕ್ಷ ಆಂಜನೇಯ ಹುಲ್ಲಾಳ, ಪ್ರಧಾನ ಕಾರ್ಯದರ್ಶಿ ಡಾ.ರಮೇಶ ತೆವರಿ, ಖಜಾಂಚಿ ಅನಿಲಕುಮಾರ ಮರೋಳ ಪ್ರಕಟಣೆಯಲ್ಲಿ ಕೋರಿದ್ದಾರೆ.