ಬಜೆಟ್ ನಲ್ಲಿ ಕೃಷಿ ಚಟುವಟಿಕೆಗಳಿಗೆ ಆದ್ಯತೆ: ಮುಖ್ಯಮಂತ್ರಿ ಬಿಎಸ್.ವೈ

Share

ಧಾರವಾಡ: ಬರುವ ಆಯವ್ಯಯದಲ್ಲಿ ನೀರಾವರಿ ಯೋಜನೆಗಳು ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶವನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನವಲಗುಂದ ತಾಲ್ಲೂಕಿನ ಅಮರಗೋಳ ಗ್ರಾಮದ ಕ್ರಾಸ್ ಬಳಿ ಇಂದು ಜಲಸಂಪನ್ಮೂಲ ಇಲಾಖೆ ಏರ್ಪಡಿಸಿದ್ದ ಸಮಾರಂಭದಲ್ಲಿ, ಮಲಪ್ರಭಾ ಯೋಜನೆಯ ಮುಖ್ಯ ಕಾಲುವೆ, ವಿತರಣಾ ,ಉಪವಿತರಣಾ ಕಾಲುವೆಗಳು ಹಾಗೂ ಲ್ಯಾಟರಲ್ಸ್ ಗಳ ಎರಡನೇ ಹಂತದ ಆಧುನೀಕರಣ ಕಾಮಗಾರಿಗಳ ಭೂಮಿ ಪೂಜೆ , ಅಮರಗೋಳ, ಗೊಬ್ಬರಗುಂಪಿ ಏತನೀರಾವರಿ ಯೋಜನೆಗಳ ಲೋಕಾರ್ಪಣೆ, ನವಲಗುಂದ ಮತ್ತು ಅಣ್ಣಿಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಕಾಮಗಾರಿ ಭೂಮಿಪೂಜೆ ,ನವಲಗುಂದ ಬಸ್ ಡಿಪೋ ಕಾಂಕ್ರೀಟಿಕರಣ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಪ್ರಧಾನ ಮಂತ್ರಿ ಕೃಷಿ ಸಮ್ಮಾನ ಯೋಜನೆಯಡಿ ಪ್ರತಿ ರೈತನಿಗೆ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಒಂದು ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮಲಪ್ರಭಾ ಯೋಜನೆಯ ಕಾಮಗಾರಿಗಳು ಪ್ರಾರಂಭವಾಗಿವೆ. ಜನರ ತೆರಿಗೆ ಹಣದಲ್ಲಿ ಕೈಗೊಳ್ಳಲಾಗುತ್ತಿರುವ ಈ ಯೋಜನೆಯ ಪ್ರತಿಯೊಂದು ಪೈಸೆಯೂ ಸದ್ಬಳಕೆಯಾಗಬೇಕು. ಸಾರ್ವಜನಿಕ ಹಣ ಬಳಕೆ ವಿಷಯದಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು.
ಎಂದರು.

ಒಂದು ಸಾವಿರ ಕೋಟಿ ರೂಪಾಯಿಗಳ ಈ ಯೋಜನೆ ನವಲಗುಂದ, ನರಗುಂದ, ರೋಣ,ಸವದತ್ತಿ, ರಾಮದುರ್ಗ, ಬದಾಮಿ, ರೋಣ ವಿಧಾನಸಭಾ ಕ್ಷೇತ್ರಗಳ ರೈತ ಸಮುದಾಯಕ್ಕೆ ವರದಾನವಾಗಲಿದೆ.ಅಮರಗೋಳ-ಗೊಬ್ಬರಗುಂಪಿ ಏತ ನೀರಾವರಿ ಯೋಜನೆಗಳಿಂದ 9808 ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಸಿಗಲಿದೆ. ನವಲಗುಂದ ತಾಲ್ಲೂಕಿನ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇನೆ ಈ ತಾಲೂಕನ್ನು ಮಾದರಿಯನ್ನಾಗಿಸಲಾಗು ವದು ಎಂದು ಹೇಳಿದರು.

ಬೃಹತ್,ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಾತನಾಡಿ, ಕಳಸಾ ಬಂಡೂರಿ ಮಹಾದಾಯಿ ತಿರುವು ಯೋಜನೆ ಸೇರಿದಂತೆ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಸಂಕಲ್ಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿದೆ. ನಮ್ಮ ಭಾಗದ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ಗಮನಸೆಳೆದು, ರಾಷ್ಟ್ರೀಯ ನೇತಾರರ ಮನವೊಲಿಸಿ ಪರಿಹಾರ ಕಂಡುಕೊಳ್ಳುವ ಛಾತಿ ಮುಖ್ಯಮಂತ್ರಿಗಳಲ್ಲಿದೆ. ಬರುವ ದಿನಗಳಲ್ಲಿ ಧಾರವಾಡ ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಮಲಪ್ರಭಾ ಜಲಾಶಯದಿಂದ ಕುಡಿಯುವ ನೀರು ಪೂರೈಸಲು 1450 ಕೋಟಿ ರೂಪಾಯಿಗಳ ವಿಸ್ತೃತ ಯೋಜನೆ ವರದಿ ಸರ್ಕಾರದ ಮುಂದಿದೆ,ಮುಖ್ಯಮಂತ್ರಿಗಳು ಈ ಯೋಜನೆ ಪರಿಶೀಲಿಸಿ ಒಪ್ಪಿಗೆ ನೀಡಲಿದ್ದಾರೆ. ಹೈದರಾಬಾದ್ ಕರ್ನಾಟಕ ಎಂದು ಕರೆಯುತ್ತಿದ್ದ ಕಲಬುರ್ಗಿ ವಿಭಾಗದ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿ ಆ ಭಾಗದ ಅಭಿವೃದ್ಧಿಗೆ ಪ್ರತಿವರ್ಷ ಸಾವಿರಾರು ಕೋಟಿ ರೂಪಾಯಿ ನೀಡುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಮರಗೋಳ ಗ್ರಾಮಸ್ಥರು, ಕಳಸಾ ಬಂಡೂರಿ ಹೋರಾಟಗಾರರು ಹಾಗೂ ವೀರಶೈವ ಸಮಾಜದ ಮುಖಂಡರು ನೇಗಿಲು ನೀಡಿ, ಹಸಿರು ಶಾಲು, ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ‌.ಪಾಟೀಲ ಮಾತನಾಡಿ, ಜನಪರ ಕಾಳಜಿಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಾಯಕತ್ವದಲ್ಲಿ ನಾಡು ಅಭಿವೃದ್ಧಿಯಲ್ಲಿ ಮುನ್ನಡೆ ಸಾಧಿಸುತ್ತಿದೆ. ಪ್ರವಾಹದ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸಿದ ರೀತಿಯನ್ನು ಮೆಚ್ಚಿ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಸರ್ಕಾರಕ್ಕೆ ಜನ ಬೆಂಬಲ ವ್ಯಕ್ತಪಡಿಸಿದ್ದಾರೆ.ಕಳಸಾ ಬಂಡೂರಿ ವ್ಯಾಜ್ಯವನ್ನು ಪರಿಹರಿಸಿ, ಮಲಪ್ರಭೆಗೆ ಮಹಾದಾಯಿ ನೀರು ತರಲು ಸರ್ಕಾರ ಬದ್ಧವಾಗಿದೆ ಎಂದರು.

ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಸವದತ್ತಿ ಶಾಸಕ ಆನಂದ ಮಾಮನಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕರಾದ ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ, ವಾಕರಸಾಸಂ ಅಧ್ಯಕ್ಷ ವಿ‌.ಎಸ್‌‌.ಪಾಟೀಲ, ಮಾಜಿಶಾಸಕರಾದ ಎಸ್ ಐ ಚಿಕ್ಕನಗೌಡ್ರ, ಅಶೋಕ ಕಾಟವೆ, ಸೀಮಾ ಮಸೂತಿ , ಜಿಪಂ ಮಾಜಿ ಅಧ್ಯಕ್ಷೆ ಚೈತ್ರಾ ಶಿರೂರ, ಬೆಳಗಾವಿ ಪ್ರಾದೇಶಿಕ ಆಯುಕ್ತ ಎ.ಎ.ಬಿಸ್ವಾಸ್, ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ , ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಮತ್ತಿತರರು ವೇದಿಕೆಯಲ್ಲಿ ಇದ್ದರು.