ರಾಣೆಬೆನ್ನೂರು ಕ್ಷೇತ್ರದ ಶಾಸಕ ಆರ್.ಶಂಕರ್ ಅನರ್ಹ: ಸ್ಪೀಕರ್ ರಮೇಶ ಕುಮಾರ್

Share

ಬೆಂಗಳೂರು: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಆರ್.ಶಂಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವುದಾಗಿ ಸ್ಪೀಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಗುರವಾರ ರಾತ್ರಿ 7:30 ಕ್ಕೆ ಬೆಂಗಳೂರಿನ ಶಕ್ತಿಸೌಧ ವಿಧಾನಸೌದಲ್ಲಿ ರಮೇಶ್‌ ಕುಮಾರ್‌ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಆರ್‌. ಶಂಕರ್‌ ನಂತರ ಪತ್ರ ಬರೆದು ಕಾಂಗ್ರೆಸ್‌ ಪಕ್ಷದಲ್ಲಿ ವಿಲೀನವಾಗುವ ಕುರಿತು ಮನವಿ ಮಾಡಿದ್ದರು. ಇದಕ್ಕೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರು ಪತ್ರ ಬರೆದಿದ್ದರು. ಹೀಗಾಗಿ ಶಂಕರ್ ಅವರಿಗೆ ಕಾಂಗ್ರೆಸ್‌ ಸಾಲಿನಲ್ಲಿ ಸ್ಥಾನ ನೀಡಲಾಯಿತು. ನಂತರ ಕಳೆದ ಜುಲೈ ಮೊದಲ ವಾರದಲ್ಲಿ ರಾಜೀನಾಮೆ ನೀಡಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಪತ್ರ ಬರೆದಿದ್ದರು. ರಾಜ್ಯಪಾಲರಿಗೂ ಈ ಪತ್ರ ಸಲ್ಲಿಸಿದ್ದರು.

ಕಾಂಗ್ರೆಸ್‌ ಪಕ್ಷದಲ್ಲಿ ವಿಲೀನಗೊಂಡಿದ್ದ ಶಂಕರ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರು ದೂರು ನೀಡಿದ್ದರು. ಇದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿದೆ. ಇಂದಿನಿಂದ ಜಾರಿಗೆ ಬರುವಂತೆ ಆರ್‌. ಶಂಕರ್‌ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್‌ ಘೋಷಿಸಿದರು.
2023ರ ಮೇ 23ರವರೆಗೂ ಆರ್‌. ಶಂಕರ್‌ ಅನರ್ಹಗೊಂಡಿರುತ್ತಾರೆ ಎಂದು ಸ್ಪೀಕರ್ ತಿಳಿಸಿದರು.